ಚಿತ್ರದುರ್ಗ : ಜು.24ಇಂದು ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಯಶಸ್ವಿಗೊಳಿಸಲು ರಾಜ್ಯ ಸರ್ಕಾರಿ ನೌಕರರು ಹೆಚ್ಚಿನ ಸಹಕಾರ ನೀಡಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮನವಿ ಮಾಡಿದರು. ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಚಿತ್ರದುರ್ಗ ಜಿಲ್ಲಾ ನೂತನ ಉಸ್ತುವಾರಿ ಮಂತ್ರಿಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭ ಹಾಗೂ 2022-23ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ನೀಡಿದ ಭರವಸೆಯಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಯೋಜನೆಗಳ ಯಶಸ್ವಿಗೆ ಸರ್ಕಾರಿ ನೌಕರರು ಹೆಚ್ಚಿನ ಸಹಕಾರ ನೀಡಬೇಕು ಎಂದರು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ್ಕೆ ಮಾತ್ರ ಸೀಮಿತವಾಗದೇ ಸಾಮಾನ್ಯಕ್ಕೂ ಹೆಚ್ಚಿನ ಒತ್ತು ನೀಡುವ ಮೂಲಕ ಗಮನಹರಿಸಬೇಕು. ಇಂದಿನ ವಿದ್ಯಾರ್ಥಿಗಳು, ಯುವ ಜನತೆ ಬಹಳಷ್ಟು ಮಂದಿ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಾಮಾನ್ಯ ಜ್ಞಾನಕ್ಕೂ ಆದ್ಯತೆ ನೀಡಬೇಕು. ಪ್ರಪಂಚ, ದೇಶ, ರಾಜ್ಯ, ಜಿಲ್ಲೆಯಲ್ಲಿ ನಡೆಯುವ ಆಗು-ಹೋಗುಗಳ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ವಿದ್ಯೆ ಯಾರ ಸ್ವತ್ತು ಅಲ್ಲ. ಆಧುನಿಕ ಯುಗದಲ್ಲಿ ಯಾರು ಹೆಚ್ಚು ಕಷ್ಟಪಡುತ್ತಾರೆ ಅಂತಹವರಿಗೆ ಯಶಸ್ಸು ಖಂಡಿತವಾಗಿಯೂ ದೊರೆಯಲಿದೆ. ವಿದ್ಯಾರ್ಥಿಗಳು ತಮ್ಮ ಕನಸು ನನಸು ಮಾಡಿಕೊಳ್ಳಲು ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯುತ್ತಮ ಬೆಳವಣಿಗೆ. ಮಕ್ಕಳನ್ನು ಸನ್ಮಾನ ಮಾಡುವುದರಿಂದ ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ವಿದ್ಯಾಭ್ಯಾಸದ ಕಡೆಗೆ ಗಮನಹರಿಸಲು ಸಹಕಾರಿಯಾಗಲಿದೆ
ಶಾಸಕರಾದ ಟಿ.ರಘುಮೂರ್ತಿ ಮಾತನಾಡಿ, ಸರ್ಕಾರಿ ನೌಕರರ ವರ್ಗಕ್ಕೆ ರಾಜಕಾರಣ ಬೇಕಾಗಿಲ್ಲ. ಯಾವುದೇ ಸರ್ಕಾರವಿರಲಿ ನೌಕರರರು ಆ ಸರ್ಕಾರಕ್ಕೆ ವಿಧೇಯರಾಗಿದ್ದುಕೊಂಡು, ಇಚ್ಚಾಶಕ್ತಿ, ಪ್ರಾಮಾಣಿಕವಾಗಿ ತಮ್ಮ ಕೆಲಸ ನಿರ್ವಹಿಸಿ, ಸರ್ಕಾರಲ್ಲಿ ಒಬ್ಬರಾಗಿ ಸೇವೆ ಮಾಡುವ ಮೂಲಕ ಸಾರ್ವಜನಿಕರ ಕಾಳಜಿ ಹೊಂದಿ ಸಮಾಜ ಸೇವೆ ಸಲ್ಲಿಸಬಹುದಾಗಿದೆ ಎಂದರು. ಕಾರ್ಯಾಂಗದ ನೌಕರ ವರ್ಗದವರು, ಶಾಸಕಾಂಗದ ವ್ಯವಸ್ಥೆಯ ಜನಪ್ರತಿನಿಧಿಗಳು ಎರಡು ಚಕ್ರಗಳಿದ್ದಂತೆ. ಈ ಎರಡು ವ್ಯವಸ್ಥೆಯನ್ನು ತಿದ್ದುವ ಕೆಲಸ ನ್ಯಾಯಾಂಗ ವ್ಯವಸ್ಥೆ ಮಾಡುತ್ತದೆ. ಸರ್ಕಾರದ ಜೊತೆಗಿದ್ದು, ನೌಕರರು ತಮ್ಮ ವೃತ್ತಿಯನ್ನು ಮಾಡಬೇಕು ಎಂದು ತಿಳಿಸಿದರು.
ಇಚ್ಚಾಶಕ್ತಿ, ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು ಎಂದು ಸರ್ಕಾರಿ ನೌಕರರ ಮಕ್ಕಳಿಗೆ ಕಿವಿಮಾತು ಹೇಳಿದ ಅವರು, ರಾಜ್ಯ ಸರ್ಕಾರಿ ನೌಕರರ ಆಶ್ವಾಸನೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸಲಿಸಲಿದೆ ಎಂದು ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ಶಾಸಕರು, ಸಂಸದರು, ಜನಪ್ರತಿನಿಧಿಗಳಿಗೆ ರಾಜ್ಯ ಸರ್ಕಾರಿ ನೌಕರರು ಸಹಕಾರ ಕೊಡುವುದರ ಮೂಲಕ ಸರ್ಕಾರದ ಯೋಜನೆಗಳ ಯಶಸ್ಸಿನಲ್ಲಿ ನೌಕರರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಪ್ರಾಮಾಣಿಕವಾಗಿ ಬದ್ಧತೆಯಿಂದ ಸಮಾಜದ ಕಟ್ಟಕಡೆಯ ಶ್ರೀಸಾಮಾನ್ಯನಿಗೆ ತಲುಪಿಸುವ ಕೆಲಸ ಮಾಡಿದಲ್ಲಿ ಸರ್ಕಾರದ ಯೋಜನೆ ಯಶಸ್ವಿಯಾಗಲಿದೆ ಎಂದು ಹೇಳಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಿ ನೌಕರರಿಗೂ ಅನುಕೂಲವಾಗಿದೆ ಎಂದರು.
7ನೇ ವೇತನ ಆಯೋಗ ಜಾರಿ ಹಾಗೂ ಎನ್ಪಿಎಸ್ನಿಂದ ಒಪಿಎಸ್ ಮಾಡುವ ವಿಚಾರದಲ್ಲಿ ಅದನ್ನೂ ಸಹಾನುಭೂತಿಯಿಂದ ಪರಿಗಣಿಸಬೇಕು ಎಂದು ಮನವಿ ಮಾಡಿದ ಅವರು, ಯಾವುದೇ ಹೋರಾಟವಿಲ್ಲದೇ ಅತ್ಯಂತ ಪ್ರೀತಿ, ವಿಶ್ವಾಸದಿಂದ ಮನಸ್ಸು ಗೆದ್ದು, ಎನ್ಪಿಎಸ್ನ್ನು ಒಪಿಎಸ್ ಮಾಡುವ ವಿಚಾರದಲ್ಲಿ ಸಹಕಾರ ನೀಡಬೇಕು. ರಾಜ್ಯದ 3 ಲಕ್ಷ ಎನ್ಪಿಎಸ್ ನೌಕರು ಇದ್ದಾರೆ. ಇದರಿಂದ ಅವರ ಕುಟುಂಬಕ್ಕೆ ಭದ್ರತೆ ಸಿಗಲಿದೆ ಎಂದರು.ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿ ವರ್ಷ ರಾಜ್ಯದಲ್ಲಿ 8 ಸಾವಿರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 250 ಮಕ್ಕಳಿಗೆ ತಲಾ 1 ಸಾವಿರ ನಗದು, ಸ್ಮರಣಿಕೆ ನೀಡಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಮಾತನಾಡಿ, ಪ್ರತಿಯೊಬ್ಬರು ಮೊಬೈಲ್ಗೆ ಹೊಂದಿಕೊಂಡಿರುವುದರಿಂದ ಯಾರೂ ಓದಿನ ಕಡೆ ಒಲವು ನೀಡುತ್ತಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಓದುವಂತಹ ಹವ್ಯಾಸ ಬೆಳೆಸಿಕೊಳ್ಳಬೇಕು. ಕೇವಲ ಸರ್ಕಾರಿ ನೌಕರಿ ಪಡೆಯಲು ಮಾತ್ರ ವಿದ್ಯಾಭ್ಯಾಸ ಪಡೆಯುವುದಲ್ಲ, ವೃತ್ತಿ ಕೌಶಲ್ಯಗಳನ್ನು ಪಡೆಯಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು. ಪ್ರತಿಯೊಬ್ಬ ಮಕ್ಕಳಲ್ಲಿ ಒಂದು ಪ್ರತಿಭೆ ಇರುತ್ತದೆ. ಅದನ್ನು ಶಿಕ್ಷಕರು ಮತ್ತು ಪೋಷಕರು ಗುರುತಿಸಬೇಕು. ಕೌಶಲ್ಯ ಆಧಾರಿತ ವೃತ್ತಿಯ ಬದುಕು ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಮೌಲ್ಯ ಶಿಕ್ಷಣದ ಜೊತೆಗೆ ನೀತಿ ಪಾಠ ಮಾಡಬೇಕು. ಆಗ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಸಮಾಜದಲ್ಲಿ ಗುರುತಿಸುವಂತಹ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ನೂನತ ಉಸ್ತುವಾರಿ ಮಂತ್ರಿ ಡಿ.ಸುಧಾಕರ್ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸನ್ಮಾನಿಸಲಾಯಿತು. 2022-23ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಲ್ಲದೆ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್,
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರ ಕೆ.ಜಿ.ಜಗದೀಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಎಂ.ಸಿ.ರುದ್ರಪ್ಪ, ಎಸ್.ಬಸವರಾಜ್, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಳ್ಳಾರಿ, ರಾಜ್ಯ ಕಾರ್ಯದರ್ಶಿ ಸದಾನಂದ ನೆಲ್ಕುದರಿ, ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು, ನೌಕರರು ಇದ್ದರು.