ಚಿಕ್ಕಮಗಳೂರು:- ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ರೋಗ ಹೆಚ್ಚಾಗುತ್ತಿದೆ. ಈ ಬಾರಿ ಆರಂಭದಲ್ಲೇ ತೀವ್ರ ಸ್ವರೂಪ ಪಡೆದಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆಎಫ್ಡಿ ಕಾಣಿಸಿಕೊಂಡಿತ್ತು.
ಆ ನಂತರ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿ ಮಾಡಿದೆ.
ಎನ್ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂರು ಜನರಲ್ಲಿ ಕೆಎಫ್ಡಿ ಕಾಣಿಸಿಕೊಂಡಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್ಡಿ ವಾರ್ಡ್ ತೆರೆಯಲಾಗಿದೆ. ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕೆಎಫ್ಡಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿದ್ದರು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನವೇ ಅರೋಗ್ಯ ಇಲಾಖೆ ಕೆಎಫ್ಡಿ ಅಲರ್ಟ್ ಘೋಷಣೆ ಮಾಡಿದೆ.
ಮಂಗನ ಕಾಯಿಲೆ ಪತ್ತೆಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯ ಹೋಬಳಿ ಮತ್ತಿಖಂಡ ಗ್ರಾಮದಲ್ಲಿ ಉಣ್ಣೆಗಳನ್ನ ಸಂಗ್ರಹ ಮಾಡಲಾಗಿದ್ದು, ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹ ಮಾಡಲಾಗಿದೆ.